ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿ ಬರ್ತಿವೆ. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಸುತ್ತ ಸುಳಿದಾದ್ತಿರೋ ಮುಡಾ ಪ್ರಕರಣ. ಬಳಿಕ ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ, ಗೃಹಸಚಿವ ಜಿ. ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ.. ಹೀಗೆ ಒಂದಲ್ಲಾ ಒಂದು ವಿಚಾರಕ್ಕೆ ರಾಜ್ಯ ಸರ್ಕಾರ ಗಂಭೀರ ಆರೋಪಗಳನ್ನ ಎದುರಿಸ್ತಿದೆ.
ಇದೀಗ ಇಂತಹದ್ದೆ ಮತ್ತೊಂದು ವಿಚಾರವಾಗಿ ರಾಜ್ಯ ಸರ್ಕಾರ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಲಂಚಾವತಾರದ ವಿಚಾರವಾಗಿ ಕಾಂಗ್ರೆಸ್ನ ಹಿರಿಯ ಶಾಸಕ ಬಿ.ಆರ್.ಪಾಟೀಲ್ (B.R Patil) ಮಾತಾಡಿರುವ ಆಡಿಯೋ ವೈರಲ್ ಆಗಿದೆ. ತಮ್ಮದೇ ಸರ್ಕಾರದ ವಿರುದ್ದ ಹಿರಿಯ ಶಾಸಕ ಬಿ.ಆರ್. ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.
ಸಚಿವ ಜಮೀರ್ ಅಹ್ಮದ್ಗೆ ಸಂಬಂಧಿಸಿದ ವಸತಿ ಇಲಾಖೆಯ ಕಾರ್ಯದರ್ಶಿ ಸರ್ಫರಾಜ್ ಖಾನ್ ಹಾಗೂ ಬಿ.ಆರ್.ಪಾಟೀಲ್ ಮಾತಾಡಿದ್ದಾರೆ ಅನ್ನೋ ಆಡಿಯೋ ಒಂದು ಸದ್ಯ ರಾಜ್ಯ ರಾಜಕೀಯದಲ್ಲಿ ಹಲ್ಚಲ್ ಎಬ್ಬಿಸಿದೆ.
ರಾಜೀವ್ ಗಾಂಧಿ ವಸತಿ ಯೋಜನೆ ವಿಚಾರಕ್ಕೆ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗ್ತಿದೆ..
ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಹಣ ನೀಡಿದವರಿಗಷ್ಟೇ ಮನೆ ಮಂಜೂರು ಸಿಗುತ್ತಿದೆ ಅಂತಾ ಕಾಂಗ್ರೆಸ್ ಶಾಸಕ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ.
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಜೊತೆಗೆ ಬಿಆರ್ ಪಾಟೀಲ್ ಮಾತನ್ನಾಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ಅದಾಗಿದೆ. ಆಡಿಯೋದಲ್ಲಿ ವಸತಿ ಯೋಜನೆಯಡಿ ಹಣ ನೀಡಿದವರಿಗಷ್ಟೇ ಮನೆ ಮಂಜೂರು ಮಾಡಲಾಗ್ತಿದೆ. ನಮ್ಮ ಸರ್ಕಾರವನ್ನೇ ದೂರಲು ನನಗೆ ಬೇಸರವಾಗ್ತಿದೆ ಎಂಬ ಅಸಮಾಧಾನ ವ್ಯಕ್ತವಾಗಿದೆ. ಬೆನ್ನಲ್ಲೇ ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಗೋಲ್ಮಾಲ್ ನಡೆಯುತ್ತಿದೆಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

