ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಏರ್‌ ಇಂಡಿಯಾ ವಿಮಾನ ದುರಂತ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಈ ದುರಂತಕ್ಕೆ ಇಡೀ ದೇಶವೇ ಶೋಕಾಚರಣೆಯಲ್ಲಿ ಮುಳುಗಿದೆ. ಇನ್ನು ಈ ಘಟನೆ ನಡೆದಾಗಿನಿಂದ ಬೇರೆಡೆ ತೆರಳುವವರು ಕೂಡ ಇದೀಗ ಭಯಭೀತರಾಗಿದ್ದಾರೆ.

ಸದ್ಯ ಪ್ರಧಾನಿ ಮೋದಿ ಅವರು ಅಹಮದಾಬಾದ್‌ಗೆ ಭೇಟಿ ನೀಡಿದ್ದು, ವಿಮಾನ ಅಪಘಾತ ನಡೆದ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ. ಹೊಸದಿಲ್ಲಿಯಿಂದ ಅಹಮದಾಬಾದ್‌ಗೆ ಬಂದಿಳಿದ ಮೋದಿ, ಸರ್ದಾರ್‌ ವಲ್ಲಭಾಯಿ ಪಟೇಲ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತೀವ್ರ ದುಃಖಿತರಾದ ಮೋದಿ, ಅಧಿಕಾರಿಗಳೊಂದಿಗೆ ಮಾತನಾಡುವಾಗಿ ಗದ್ಗತಿರಾದರು. ಅಪಘಾತ ನಡೆದ ಸ್ಥಳ ಮತ್ತು ಅಪಘಾತದಿಂದ ಹಾನಿಗೊಳಗಾದ ಹಾಸ್ಟೆಲ್‌ ಪ್ರದೇಶವನ್ನು ಪರಿಶೀಲಿಸಿದರು. ಈ ವೇಳೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಲದೇ, ದುರಂತದಲ್ಲಿ ಪವಾಡ ಸದೃಶದಂತೆ ಪಾರಾದ ಓರ್ವ ಪ್ರಯಾಣಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿಗೆ ಭೇಟಿ ನೀಡಿ ಮೋದಿ ಪ್ರಯಾಣಿಕ ರಮೇಶ್‌ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು..

ಇನ್ನು ಅಪಘಾತ ಸಂಭವಿಸಿದ ಬಳಿಕ ನಿರಂತರವಾಗಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್‌ ಮೋಹನ್‌ ನಾಯ್ಡು ಅವರನ್ನು ತಕ್ಷಣ ಅಹಮದಾಬಾದ್‌ಗೆ ತೆರಳುವಂತೆ ಸೂಚನೆ ನೀಡಿದ್ದರು.

ಇದೀಗ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪಿಎಂ ಮೋದಿ, ನಾಗರಿಕ ವಿಮಾನಯಾನ ಇಲಾಖೆ ಅಧಿಕಾರಿಗಳಿಂದ ಪ್ರಧಾನಿ ಮೋದಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.

Share.
Leave A Reply