
ರಾಜ್ಯಾದ್ಯಂತ ಭಾರೀ ಮಳೆ ಮತ್ತು ಪ್ರವಾಹದಿಂದ ಭಾರೀ ಬೆಳೆ ಹಾನಿ ಸಂಭವಿಸಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕೂಡಲೇ ರೈತರ ಸಾಲ ಮನ್ನಾ ಮಾಡಬೇಕೆಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಕಲಬುರಗಿಯ ಎಪಿಎಂಸಿ ಮಾರುಕಟ್ಟೆಯ ಬಳಿ ಮಾಧ್ಯಮಗಳ ಜತೆ ಮಾತನಾಡಿದ ನಿಖಿಲ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಬಾರಿ ಅತಿವೃಷ್ಟಿಯಿಂದ ರಾಜ್ಯದಲ್ಲಿ ಭಾರಿ ಪ್ರಮಾಣದ ಬೆಳೆಹಾನಿ ಸಂಭವಿಸಿದೆ. ಇಷ್ಟಾದರೂ ಸಿಎಂ ಸಿದ್ದರಾಮಯ್ಯ ಅವರು ಕೃಷ್ಣ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮಾಡುವುದು ಬಿಟ್ಟರೆ ಬೇರೆ ಏನು ಮಾಡಿಲ್ಲ. ರಾಜ್ಯದಿಂದ ಕೃಷಿ ಸಚಿವರು ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿಲ್ಲ. ಕೃಷಿ ಸಚಿವರು ರೈತರ ಸಂಕಷ್ಟವನ್ನು ಆಲಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕಲಬುರಗಿ ಜಿಲ್ಲೆಗಳನ್ನ ಕೃಷಿ ಸಚಿವರು ಮರತೇ ಬಿಟ್ಟಿದ್ದಾರೆ. ಈ ಭಾಗದಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದರೂ ಸಹ ಕೃಷಿ ಸಚಿವರು ಭೇಟಿ ನೀಡಿಲ್ಲ ಎಂದು ನಿಖಿಲ್ ಕಿಡಿಕಾರಿದ್ರು. ಜೆಡಿಎಸ್ ಪಕ್ಷಕ್ಕೆ ಅಧಿಕಾರ ಇರಲಿ ಬಿಡಲಿ ರೈತರ ಪರವಾಗಿ ನಮ್ಮ ಬದ್ಧತೆಯನ್ನು ತೋರಿಸಿದ್ದೇವೆ. ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಕೆಕೆಆರ್ಡಿಬಿ ವತಿಯಿಂದ ಐದು ಸಾವಿರ ಕೋಟಿ ಹಣ ಅಭಿವೃದ್ಧಿ ಮಾಡಲು ಮೀಸಲಿಟ್ಟಿದ್ದೇವೆ ಎಂದು ಭಾಷಣ ಮಾಡುತ್ತಾರೆ. ಇಂತಹ ಸಮಯದಲ್ಲಿ ರೈತರಿಗೆ ವಿಶೇಷ ಪ್ಯಾಕೇಜ್ಗಳನ್ನು ನೀಡುವುದರ ಮೂಲಕ ರೈತರ ಸಾಲದ ಹೊರೆಯನ್ನ ಕಡಿಮೆ ಮಾಡಬೇಕೆಂದು ಆಗ್ರಹಿಸಿದ್ರು.
Read Also : ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧ : ಹೈಕೋರ್ಟ್ ಮೆಟ್ಟಿಲೇರಿದ್ದ ಪ್ರತಾಪ್ ಸಿಂಹಗೆ ಮುಖಭಂಗ
