ಭಾರತ-ಪಾಕ್: ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿದ್ದ ವೈಮಾನಿಕ ದಾಳಿಗೆ ಸದ್ಯ ಬ್ರೇಕ್ ಬಿದ್ದಿದೆ. ಕಳೆದ ಕೆಲವು ದಿನಗಳಿಂದ ಪಾಕಿಸ್ತಾನದಿಂದ ಪದೇ ಪದೇ ಡ್ರೋನ್ ದಾಳಿಗಳಿಗೆ ಭಾರತ ಪ್ರತಿಕ್ರಿಯಿಸುತ್ತಿದ್ದು, ತನ್ನ ವಾಯು ರಕ್ಷಣಾ ವ್ಯವಸ್ಥೆಗಳನ್ನು ಬಳಸಿಕೊಂಡು ಅವರನ್ನು ಹೊಡೆದುರುಳಿಸುತ್ತಿತ್ತು. ಸದ್ಯ ಭಾರತ ಮತ್ತು ಪಾಕಿಸ್ತಾನ ತಕ್ಷಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ತಿಳಿಸಿದ್ದಾರೆ.
ಭಾರತ-ಪಾಕ್ ಎರಡೂ ದೇಶಗಳ ನಡುವೆ ಶಾಂತಿ ಮಾತುಕತೆಗೆ ಕೆಲವು ದೇಶಗಳು ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದವು. ಅದರಲ್ಲಿ ಅಮೆರಿಕ ಕೂಡ ಒಂದು. ಭಾರತದ ಜೊತೆ ಉತ್ತಮ ಸಂಬಂಧ ಹೊಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿ ಭಾರತ ತಮ್ಮ ಮೇಲೆ ದಾಳಿ ನಡೆಸುವುದನ್ನು ತಡೆಯಬೇಕೆಂದು ಪಾಕಿಸ್ತಾನದ ಪ್ರಧಾನಿ ಮನವಿ ಮಾಡಿದ್ದರು ಎಂಬ ಸುದ್ದಿಗಳು ಹರಿದಾಡಿದ್ದವು. ಇಂದು ಈ ಬಗ್ಗೆ ಘೋಷಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಹೇಳಿದ್ದಾರೆ.
ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ಯಾವಾಗಲೂ ಶ್ರಮಿಸುತ್ತಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ.
ಮಹತ್ವದ ರಾಜತಾಂತ್ರಿಕ ಬೆಳವಣಿಗೆಯೊಂದರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದು, ಭಾರತ ಮತ್ತು ಪಾಕಿಸ್ತಾನದ ನಡುವಿನ ಬಿಕ್ಕಟ್ಟನ್ನು ಬಗೆಹರಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸಿದೆ. ದೀರ್ಘ ರಾತ್ರಿಯ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದಿದ್ದಾರೆ. ಡೊನಾಲ್ಡ್ ಟ್ರಂಪ್ ಭಾರತ-ಪಾಕಿಸ್ತಾನ ಎರಡೂ ರಾಷ್ಟ್ರಗಳು ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆ ತೋರಿಸಿದ್ದಕ್ಕಾಗಿ ಶ್ಲಾಘಿಸಿದ್ದಾರೆ. ದಿನಗಟ್ಟಲೆ ಉಲ್ಬಣಗೊಳ್ಳುತ್ತಿದ್ದ ಮಿಲಿಟರಿ ಸಂಘರ್ಷದ ನಂತರ ಯುದ್ಧವನ್ನು ನಿಲ್ಲಿಸಿ ಶಾಂತತೆಯನ್ನು ಪುನಃಸ್ಥಾಪಿಸುವ ಎರಡೂ ದೇಶಗಳ ನಿರ್ಧಾರವನ್ನು ಅವರು ಶ್ಲಾಘಿಸಿದರು.
Also Read: Dawood Ibrahim: ಜನರಿಗಿಂತ ಉಗ್ರರ ಮೇಲೆಯೇ ಪಾಕ್ಗೆ ಪ್ರೀತಿ: ಹೇಡಿ ದಾವೂದ್ ಇಬ್ರಾಹಿಂ ಮತ್ತೆ ಎಸ್ಕೇಪ್?
ಕಳೆದ 48 ಗಂಟೆಗಳಲ್ಲಿ, ಉಪಾಧ್ಯಕ್ಷ ವ್ಯಾನ್ಸ್ ಮತ್ತು ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಶೆಹಬಾಜ್ ಷರೀಫ್, ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್, ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಮತ್ತು ಅಸಿಮ್ ಮಲಿಕ್ ಸೇರಿದಂತೆ ಹಿರಿಯ ಭಾರತೀಯ ಮತ್ತು ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ” ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದ್ದಾರೆ. ಶಾಂತಿಯ ಮಾರ್ಗವನ್ನು ಆರಿಸಿಕೊಳ್ಳುವಲ್ಲಿ ಪ್ರಧಾನಿ ಮೋದಿ ಮತ್ತು ಷರೀಫ್ ಅವರ ಬುದ್ಧಿವಂತಿಕೆ, ವಿವೇಕ ಮತ್ತು ರಾಜತಾಂತ್ರಿಕತೆಯನ್ನು ನಾವು ಶ್ಲಾಘಿಸುತ್ತೇವೆ ಎಂದರು.
