ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ Bengaluru ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು, ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ ಸಲಹೆ ಕೇಳಲಾಗುವುದು. ಸದನದಲ್ಲಿಈ ಬಗ್ಗೆ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿತ್ತು. ಅವರ ಶೇ.90 ರಷ್ಟು ಅಭಿಪ್ರಾಯಗಳನ್ನು ಪರಿಗಣಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ನಡೆಸಲಾಗುವುದು. ಹೊಸ ಪ್ರದೇಶಗಳನ್ನು ಸೇರಿಸಲು ವಿಳಂಬವಾಗುತ್ತದೆ. ಈಗ ಹೇಗಿದೆಯೋ ಅದೇ ರೀತಿ ಮುಂದುವರೆಯಲಾಗುವುದು ಎಂದು ತಿಳಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಅವರು ಇದನ್ನು ಕ್ವಾರ್ಟರ್ ಬೆಂಗಳೂರು ಎಂದು ಲೇವಡಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಈ ವಿಧೇಯಕವು ಮೊದಲಿಗೆ ಬಂದಾಗಲೇ ವಿರೋಧ ವ್ಯಕ್ತಪಡಿಸಬೇಕಿತ್ತು. ಸದನದಲ್ಲೇಕೆ ಜಾರಿಗೆ ತರಲು ಒಪ್ಪಿಗೆ ಸೂಚಿಸಿದರು. ಅವರು ಕ್ವಾರ್ಟರ್ ಬೆಂಗಳೂರು, ಫುಲ್ ಬೆಂಗಳೂರು ಎಂದು ಏನಾದರು ಹೇಳಲಿ. ಆದರೆ ಅವರು ಏಕೆ ಸದನದಲ್ಲಿ ಸಲಹೆಗಳನ್ನು ನೀಡಿದರು. ವಿರೋಧ ಪಕ್ಷದವರು ಅಷ್ಟು ಮಾತನಾಡಲಿಲ್ಲ ಎಂದರೆ ಗೌರವ ಕಡಿಮೆ ಅಲ್ಲವೇ? ಹೀಗಾಗಿ ಮಾತನಾಡುತ್ತಿದ್ದಾರೆ. ಅವರು ಬೆಂಗಳೂರಿನ ಒಂದು ಭಾಗ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನಾವು ನೀಡುತ್ತೇವೆ ಎಂದರು.

Also Read: ಬಿಜೆಪಿಯವರಿಗೆ ಜನ ಕಲ್ಲಿನಲ್ಲಿ ಹೊಡೆಯುತ್ತಾರೆ : ಹೀಗಂದಿದ್ಯಾಕೆ Priyank Kharge

ರಾಮನಗರ ಹೆಸರು ಬದಲಾವಣೆ ಬಗ್ಗೆ ಮಾತನಾಡಿದ ಅವರು, ಹೆಸರು ಬದಲಾವಣೆಗೆ ತಡವಾಗುತ್ತಿದೆ ಎಂದು ಹೇಳಿದವರು ಯಾರು..? ಒಳ್ಳೆ ಶುಭ ಮುಹೂರ್ತ, ಶುಭ ಘಳಿಗೆಯಲ್ಲಿ ಕಾನೂನಿನ ಅಡಿಯಲ್ಲಿಯೇ ಘೋಷಣೆ ಮಾಡಲಾಗುವುದು. ಶೀಘ್ರದಲ್ಲಿಯೇ ಸಮಯ ತಿಳಿಸುತ್ತೇನೆ ಎಂದರು.

ಇನ್ನು ಪೆಹಲ್ಗಾಮ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ತೀರ್ಮಾನ ಮಾಡಿದೆ. “ಪಕ್ಷ, ವ್ಯಕ್ತಿಗಿಂತ ದೇಶ ದೊಡ್ಡದು ಎಂಬುದು ನಮ್ಮ ಒಮ್ಮತದ ತೀರ್ಮಾನ. ಪ್ರಧಾನಿಗಳಿಗೆ ನೀವು ಯಾವ ತೀರ್ಮಾನ ತೆಗೆದುಕೊಂಡರೂ ಬೆಂಬಲ ಸೂಚಿಸುವುದಾಗಿ, ಜೊತೆಗೆ ಯಾವ ರಾಷ್ಟ್ರಕ್ಕೂ ಮಣಿಯಬಾರದು ಎಂದು ಹೇಳಿದ್ದೆವು” ಎಂದರು.

“ನಮ್ಮ ಸಂಸದರು ಸಹಿ ಮಾಡಿ ಪ್ರಧಾನಿಗಳಿಗೆ ನೀಡುತ್ತಿದ್ದಾರೆ. ಏನು ಬೆಳವಣಿಗೆಯಾಗಿದೆ ಎಂದು ತಿಳಿಸಬೇಕು ಎಂದು ಹೇಳಿದ್ದೇವೆ. ಬೇರೆ ದೇಶದವರು ನಮ್ಮ ದೇಶದ ಸ್ವಾಭಿಮಾನದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾಗಾಂಧಿ ಅವರ ಕಾಲದಿಂದಲೂ ನಾವು ಯಾರ ಹಂಗಿಗೂ ಒಳಗಾದವರಲ್ಲ. ಇಂತಹ ಸಂದರ್ಭದಲ್ಲಿ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು ಎಂದು ಕೇಳುವುದು ನಮ್ಮ ಹಕ್ಕು” ಎಂದರು.

ಕಬಿನಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ ಗಳ ಬಗ್ಗೆ ಕೇಳಿದಾಗ, “ಈ ಬಗ್ಗೆ ಪಟ್ಟಿ ಮಾಡಿ ನನಗೆ ನೀಡಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದರು.

63 ನೇ ಹುಟ್ಟುಹಬ್ಬ ಆಚರಣೆಗೆ ಮಾತನಾಡಿದ ಅವರು, “ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿಲ್ಲ. ಹೊರಗಡೆ ಹೋಗುವುದು ಬೇಡವೆಂದು ನಮ್ಮ ಕುಟುಂಬ ಸದಸ್ಯರ ಜೊತೆ ರಾಜ್ಯದ ಅರಣ್ಯ ಸಂಪತ್ತು ವೀಕ್ಷಣೆ ಮಾಡಿದ್ದೇನೆ. ಈ ಬಗ್ಗೆ ನಿಮ್ಮೆಲ್ಲರ ಆಶೀರ್ವಾದವಿರಲಿ” ಎಂದರು.

Share.
Leave A Reply