Advertisement

ಬೆಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ಭ್ರೂಣ ಹತ್ಯೆಯಂತಹ ಅಮಾನವೀಯ ಘಟನೆಗಳು ಹೆಚ್ಚಾಗಿ ಕೇಳಿ ಬರುತ್ತಿದ್ದವು. ಹೀಗಾಗಿ ಪ್ರಜ್ಞಾವಂತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ದಿಟ್ಟ ನಿರ್ಧಾರವೊಂದನ್ನು ತೆಗೆದುಕೊಂಡಿದೆ.
ಭ್ರೂಣ ಹತ್ಯೆ (Female Foeticide) ತಡೆಗಟ್ಟುವುದಕ್ಕಾಗಿ ಸರ್ಕಾರವು, ಭ್ರೂಣ ಹತ್ಯೆ ಬಗ್ಗೆ ಮಾಹಿತಿ ಕೊಡುವ ಸಾರ್ವಜನಿಕರಿಗೆ ನಗದು ಬಹುಮಾನ ನೀಡುವುದಕ್ಕೆ ಮುಂದಾಗಿದೆ.

ಮಾಹಿತಿ ನೀಡಿದವರಿಗೆ 50 ಸಾವಿರ ರೂ.ನಿಂದ 1 ಲಕ್ಷ ರೂ. ವರೆಗೆ ಹೆಚ್ಚಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಕುರಿತು ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ಆರೋಗ್ಯ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು. ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಜಾರಿಗೆ ತಂದಿದೆ. ಹೆಣ್ಣು ಮಗು ತನ್ನ ಕುಟುಂಬ ಅಥವಾ ಸಮಾಜಕ್ಕೆ ಹೊರೆಯಲ್ಲ, ಅವಳು ಶಕ್ತಿ ಮತ್ತು ಚೈತನ್ಯದ ಮೂಲ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸುಮಾರು ಶೇ. 60ರಷ್ಟು ಮಹಿಳಾ ನೌಕರಸ್ಥರೇ ಇದ್ದಾರೆ. ಭ್ರೂಣ ಹತ್ಯೆಯಂತಹ ಕ್ರೂರ ಅಥವಾ ಅಮಾನವೀಯ ಪದ್ಧತಿ ನಿರ್ಮೂಲನೆ ಮಾಡಲು ನಮ್ಮ ಸರ್ಕಾರವು ವಿಶ್ವಾಸಾರ್ಹ ಮಾಹಿತಿ ನೀಡುವವರಿಗೆ 1 ಲಕ್ಷ ರೂ. ಬಹುಮಾನ ನೀಡುತ್ತಿದೆ.

ಇಲ್ಲಿಯವರೆಗೆ ರಾಜ್ಯದಲ್ಲಿ ಇಬ್ಬರು ಈ ಬಹುಮಾನ ಪಡೆದಿದ್ದಾರೆ ಎಂದು ಹೇಳಿದ್ದಾರೆ. ಹೆಣ್ಣು ಮಕ್ಕಳಿಗೆ ಆತಂಕ ಮುಕ್ತ ಮತ್ತು ಸುರಕ್ಷಿತ ವಾತಾವರಣ ಸೃಷ್ಟಿಸುವುದು ನಮ್ಮ ಜವಾಬ್ದಾರಿ. ಹೀಗಾಗಿ ಈ ಅಭಿಯಾನದಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.

Share.
Leave A Reply